ಕೇಂದ್ರ ಸರ್ಕಾರದ 10 ಜಂಟಿ ಕಾರ್ಯದರ್ಶಿಗಳು ಮತ್ತು 35 ನಿರ್ದೇಶಕರು, ಉಪ ಕಾರ್ಯದರ್ಶಿಗಳ ಹುದ್ದೆಗಳ ಲ್ಯಾಟರಲ್ ಎಂಟ್ರಿ ನೇಮಕಾತಿ ಜಾಹೀರಾತು ಹಿಂಪಡೆಯುವಂತೆ ಕೇಂದ್ರ ಸರ್ಕಾರ ಇಂದು (ಆಗಸ್ಟ್ 20) ಕೇಂದ್ರೀಯ ಲೋಕಸೇವಾ ಆಯೋಗಕ್ಕೆ (ಯುಪಿಎಸ್ಸಿ) ನಿರ್ದೇಶಿಸಿದೆ.
ಸರ್ಕಾರಿ ಸೇವೆಗೆ ನೇಮಕಾತಿ ಮಾಡುವಾಗ ಮೀಸಲಾತಿಯನ್ನು ಕಡ್ಡಾಯವಾಗಿ ಅನ್ವಯಿಸಲೇಬೇಕು. ಹಾಗೆ ಮಾಡದ ನೇಮಕಾತಿಗಳು ಸ್ವೀಕಾರಾರ್ಹವಲ್ಲ ಎಂದು ಪ್ರತಿಪಕ್ಷಗಳು ಪ್ರತಿಭಟನೆ ವ್ಯಕ್ತಪಡಿಸಿದ್ದವು. ಎನ್ಡಿಎ ಮಿತ್ರ ಪಕ್ಷ ಲೋಕ ಜನಶಕ್ತಿ ಪಕ್ಷ (ಎಲ್ಜೆಪಿ) ಕೂಡ ಇದಕ್ಕೆ ವಿರೋಧ ವ್ಯಕ್ತಪಡಿಸಿತ್ತು. ಇದಾದ ಬೆನ್ನಲ್ಲೇ ಕೇಂದ್ರ ಈ ಸೂಚನೆ ನೀಡಿದೆ.
ಸರ್ಕಾರದ ಈ ಕ್ರಮದಿಂದ ಎಸ್ಸಿ, ಎಸ್ಟಿ ಸೇರಿದಂತೆ ಹಿಂದುಳಿದ ಸಮುದಾಯಗಳ ಮೀಸಲಾತಿ ಹಕ್ಕನ್ನು ಕಸಿದುಕೊಂಡಂತಾಗುತ್ತದೆ ಎಂದು ಪ್ರತಿಪಕ್ಷಗಳು ಹೇಳಿದ್ದವು. ಪ್ರಮುಖ ಹುದ್ದೆಗಳಿಗೆ ಆರ್ಎಸ್ಎಸ್ ಸಂಬಂಧಿತ ವ್ಯಕ್ತಿಗಳನ್ನು ನೇಮಕ ಮಾಡಿಕೊಳ್ಳಲು ಹಿಂಬಾಗಿಲಿನಿಂದ(ಲ್ಯಾಟರಲ್ ಎಂಟ್ರಿ) ಈ ಪ್ರಯತ್ನ ಮಾಡಲಾಗಿದೆ ಎಂದು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದರು. ಇದಾದ ಬೆನ್ನಲ್ಲೇ ಕೇಂದ್ರ ಸರ್ಕಾರ ಯೂಟರ್ನ್ ಹೊಡೆದಿದೆ.
ಪ್ರಧಾನಿ ನರೇಂದ್ರ ಮೋದಿ ನಿರ್ದೇಶನದ ಮೇರೆಗೆ ಕೇಂದ್ರ ಲೋಕಸೇವಾ ಆಯೋಗದ ಅಧ್ಯಕ್ಷರಿಗೆ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಸಚಿವ ಜಿತೇಂದ್ರ ಸಿಂಗ್ ಅವರು, ಯುಪಿಎಸ್ಸಿ ಅಧ್ಯಕ್ಷೆ ಪ್ರೀತಿ ಸೂದನ್ ಅವರಿಗೆ ಪತ್ರ ಬರೆದು ತಿಳಿಸಿದ್ದಾರೆ.
‘ಲ್ಯಾಟರಲ್ ಎಂಟ್ರಿ’ ಮೂಲಕ ಕೇಂದ್ರ ಲೋಕಸೇವಾ ಆಯೋಗಕ್ಕೆ(ಯುಪಿಎಸ್ಸಿ) ಜಂಟಿ ಕಾರ್ಯದರ್ಶಿಗಳು, ನಿರ್ದೇಶಕರು ಮತ್ತು ಉಪ ಕಾರ್ಯದರ್ಶಿಗಳೂ ಸೇರಿದಂತೆ 45 ಮಂದಿಯ ನೇಮಕಾತಿ ಕುರಿತಂತೆ ಶನಿವಾರ ಯುಪಿಎಸ್ಸಿ ನೋಟಿಫಿಕೇಶನ್ ಹೊರಡಿಸಿತ್ತು. ಕೇಂದ್ರ ಸರ್ಕಾರದ ಉನ್ನತ ಹುದ್ದೆಗಳಿಗೆ ಖಾಸಗಿ ವಲಯದ ಪರಿಣತರು ಹಾಗೂ ತಜ್ಞರನ್ನು ‘ಲ್ಯಾಟರಲ್ ಎಂಟ್ರಿ’ ಮೂಲಕ ನೇಮಕ ಮಾಡಿಕೊಳ್ಳುತ್ತಿದ್ದೇವೆ ಎಂದು ಯುಪಿಎಸ್ಸಿ ತಿಳಿಸಿತ್ತು.
ಆದರೆ ಯುಪಿಎಸ್ಸಿಯ ಈ ನಿರ್ಧಾರ ಮೀಸಲಾತಿಗೆ ಧಕ್ಕೆ ತರುತ್ತದೆ ಎಂದು ಪ್ರತಿಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದವು.
“ಈ ಕೂಡಲೇ ಜಾಹೀರಾತನ್ನು ರದ್ದು ಮಾಡಿ, ಹಿಂದುಳಿದ ಸಮುದಾಯಗಳ ಜನರು ಸರ್ಕಾರಿ ಹುದ್ದೆಗಳಲ್ಲಿ ನ್ಯಾಯಸಮ್ಮತವಾಗಿ ತಮ್ಮ ಪ್ರಾತಿನಿಧ್ಯ ಪಡೆಯಲು ಅವಕಾಶ ಮಾಡಿಕೊಡಿ” ಎಂದು ಈ ಪತ್ರದಲ್ಲಿ ಉಲ್ಲೇಖಿಸಲಾಗಿದೆ.