Thursday, September 19, 2024

ಪ್ರಾಯೋಗಿಕ ಆವೃತ್ತಿ

ಪಶ್ಚಿಮ ಬಂಗಾಳ | ಪಂಚಾಯ್ತಿ ಚುನಾವಣಾಯಲ್ಲಿ ಬುಗಿಲೆದ್ದ ಹಿಂಸಾಚಾರ

ಪಶ್ಚಿಮ ಬಂಗಾಳದಲ್ಲಿ ನಡೆದ ಪಂಚಾಯ್ತಿ ಚುನಾವಣೆಯಲ್ಲಿ ಹಿಂಸಾಚಾರ ಬುಗಿಲೆದ್ದಿದ್ದು, ವಿವಿಧ ಪಕ್ಷಗಳ ಒಂಬತ್ತು ಜನ ಮೃತಪಟ್ಟ ಬೆನ್ನಲ್ಲೇ ಇದೀಗ ಬಾಂಬ್‌ ಸ್ಫೋಟ ಸಂಭವಿಸಿದೆ. ಈ ಘಟನೆಯಲ್ಲಿ ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ. ಗಾಯಗೊಂಡ ಮಕ್ಕಳನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಆಸ್ಪತ್ರೆಗೆ ರಾಜ್ಯಪಾಲ ಡಾ. ಸಿ.ವಿ.ಆನಂದ ಬೋಸ್ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಅಧಿಕಾರಿಗಳು, ”ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ಶನಿವಾರ ನಡೆದ ಮತದಾನ ಸಂದರ್ಭದಲ್ಲಿ ದುಷ್ಕರ್ಮಿಗಳು ಇಟ್ಟಿದ್ದ ಕಚ್ಚಾ ಬಾಂಬ್ ಸ್ಫೋಟಗೊಂಡಿದೆ. ಚೆಂಡು ಎಂದುಕೊಂಡ ಮಕ್ಕಳು ಬಾಂಬ್‌ ಅನ್ನು ಮುಟ್ಟಿದಾಗ ಅದು ಸ್ಫೋಟಗೊಂಡಿದೆ ಈ ವೇಳೆ 8 ಹಾಗೂ 10 ವರ್ಷದ ಇಬ್ಬರು ಮಕ್ಕಳು ಸೇರಿ ಹಲವರು ಗಾಯಗೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಇನ್ನಷ್ಟು ಬಾಂಬುಗಳು ಇರುವ ಕುರಿತು ಪತ್ತೆಕಾರ್ಯ ಕೈಗೊಂಡಿದ್ದಾರೆ” ಎಂದು ತಿಳಿಸಿದ್ದಾರೆ.

”ಮತದಾನಕ್ಕೆ ಬರುವ ಜನರನ್ನು ಬೆದರಿಸುವ ಉದ್ದೇಶದಿಂದ ಶುಕ್ರವಾರ ರಾತ್ರಿಯೇ ಈ ಕಚ್ಚಾ ಬಾಂಬುಗಳನ್ನು ಇಡಲಾಗಿದೆ. ಈ ಸಮಯದಲ್ಲಿ ಸ್ಥಳದಲ್ಲಿ ಆಗ ಪೊಲೀಸರೇ ಇರಲಿಲ್ಲ. ಇದ್ದಿದ್ದರೆ ಈ ಅನಾಹುತವನ್ನು ತಪ್ಪಿಸಬಹುದಿತ್ತು” ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಘಟನೆಯ ಕುರಿತು ಮಾಹಿತಿ ಪಡೆದ ರಾಜ್ಯಪಾಲ ಡಾ. ಸಿ.ವಿ.ಆನಂದ ಬೋಸ್, ಮಕ್ಕಳ ಮನೆಗೆ ಭೇಟಿ ನೀಡಿ ಪಾಲಕರೊಂದಿಗೆ ಚರ್ಚಿಸಿದರು. ನಂತರ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದರು . ಹೆಚ್ಚಿನ ಚಿಕಿತ್ಸೆಗಾಗಿ ಕೊಲ್ಕತ್ತದ ಅರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಗಾಯಗೊಂಡ ಮಕ್ಕಳನ್ನು ಸ್ಥಳಾಂತರಿಸಲು ಅಧಿಕಾರಿಗಳಿಗೆ ಸೂಚಿಸಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!