ಶ್ರೀರಂಗಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಹಿಳಾ ರೋಗಿಗಳೊಂದಿಗೆ ಮಾತುಕತೆ ನಡೆಸಿ ಆಸ್ಪತ್ರೆಯಲ್ಲಿ ಸಿಗುವ ಸೇವೆಗಳ ಬಗ್ಗೆ ಪರಿಶೀಲಿಸಿದರು.
ನಂತರ ಹೆರಿಗೆ ಕೊಠಡಿ, ಬಾಣಂತಿ ವಿಭಾಗ, ತುರ್ತು ಚಿಕಿತ್ಸಾ ವಿಭಾಗ, ಹೊರರೋಗಿಗಳ ವಿಭಾಗ ಹಾಗೂ ವಿವಿಧ ವಿಭಾಗಗಳಿಗೆ ಭೇಟಿ ನೀಡಿ ರೋಗಿಗಳೊಂದಿಗೆ ಆಸ್ಪತ್ರೆಯಲ್ಲಿ ಸಿಗುವ ವೈದ್ಯಕೀಯ ಸೇವಾ, ಸೌಲಭ್ಯಗಳ ಕುರಿತು ಕೂಲಂಕುಷವಾಗಿ ಪರಿಶೀಲಿಸಿ ಮಾತುಕತೆ ನಡೆಸಿದಾಗ ರೋಗಿಗಳು ಉತ್ತಮ ಪ್ರತಿಕ್ರಿಯೆ ವ್ಯಕ್ತಪಡಿಸಿದರು.
ಬಾಣಂತಿ ವಾರ್ಡನಲ್ಲಿ ಮಹಿಳೆಯರು ವೈದ್ಯರ ಹಾಗೂ ಸಿಬ್ಬಂದಿಗಳ ಸೇವೆಯನ್ನು ಕೊಂಡಾಡಿದರು.
ಹಾಗೆಯೇ ಆಸ್ಪತ್ರೆಯ ಶುಚಿತ್ವದ ಬಗ್ಗೆ ಆಯೋಗದ ಅಧ್ಯಕ್ಷರು ಮೆಚ್ಚುಗೆ ವ್ಯಕ್ತ ಪಡಿಸಿ ಸಾರ್ವಜನಿಕರು ಆಸ್ಪತ್ರೆಯಲ್ಲಿ ಸಿಗುವ ಸೇವಾ ಸೌಲಭ್ಯಗಳನ್ನು ಪಡೆಯಬೇಕೆಂದು ಮನವಿ ಮಾಡಿದರು.
ಈ ವೇಳೆ ಮುಖ್ಯ ವೈದ್ಯಾಧಿಕಾರಿ ಪಿ.ಮಾರುತಿ ಹಾಗೂ ಶುಶ್ರೂಷಣಾಧಿಕಾರಿಗಳು ಹಾಜರಿದ್ದರು.