ಮಂಡ್ಯ ತಾಲ್ಲೂಕಿನ ಹಲ್ಲೇಗೆರ ಗ್ರಾಮದ ಡಾ.ಎಲ್.ಎನ್.ಮೂರ್ತಿ ಅವರು ಅನಿವಾಸಿ ಭಾರತೀಯರಾಗಿದ್ದು, ಹಲ್ಲೆಗೆರೆ ಗ್ರಾಮದಲ್ಲಿ ವಿಶ್ವದ ಅತ್ಯಂತ ದೊಡ್ಡ ಆಧ್ಯಾತ್ಮಿಕ ಕೇಂದ್ರವನ್ನು ನಿರ್ಮಾಣ ಮಾಡಲು ಉದ್ದೇಶಿಸಿದ್ದು, ಈ ಗ್ರಾಮಕ್ಕೆ ವಿಶ್ವದ ಅಗ್ರ ಗಣ್ಯನಾಯಕರು ಭೇಟಿ ನೀಡುತ್ತಿರುವ ಹಿನ್ನೆಲೆ ಮಂಡ್ಯ ಶಾಸಕ ಪಿ.ರವಿಕುಮಾರ್ ಹಾಗೂ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಶನಿವಾರ ಹಲ್ಲೆಗೇರೆ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸ್ಥಳ ಪರಿಶೀಲನೆ ನಂತರ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸಲಹೆ ಮತ್ತು ಸೂಚನೆಗಳನ್ನು ನೀಡಿದರು. ನಂತರ ಬಸರಾಳು ಹೋಬಳಿ ಶಿವಪುರ ಗ್ರಾಮದಲ್ಲಿ ಪೌತಿಖಾತೆ ಆಂದೋಲನ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಚಾಲನೆ ನೀಡಿ ಮಾತನಾಡಿ, ಜಿಲ್ಲೆಯಲ್ಲಿ ಸುಮಾರು 15 ಸಾವಿರಕ್ಕೂ ಹೆಚ್ಚು ಪೌತಿ ಖಾತೆಯಾಗದಿರುವ ಬಗ್ಗೆ ಕಂಡುಬಂದಿದ್ದು ರೈತರಿಗೆ ಅನುಕೂಲ ವಾಗುವಂತೆ ಆಂದೋಲನ ಹಮ್ಮಿಕೊಂಡಿದ್ದು, ಇದರ ಸದುಪಯೋಗ ಪಡಿಸಿಕೊಳ್ಳಲು ತಿಳಿಸಿದರು.
ವಿಧವಾ ವೇತನ, ಇತರ ಯೋಜನೆಗಳ ಲಾಭ ಪಡೆಯುವಂತೆ ಸಾರ್ವಜನಿಕರಿಗೆ ಮನವಿ ಮಾಡಿದರು ಹಾಗೂ ಸಾರ್ವಜನಿಕರಿಂದ ಕುಂದುಕೊರತೆ ಅರ್ಜಿ ಸ್ವೀಕರಿಸಿದರು.
ಜಿ.ಪಂ.ಸಿಇಒ ಶೇಖ್ ತನ್ವೀರ್ ಆಸೀಫ್ ಮಾತನಾಡಿ, ಸರ್ಕಾರಿ ಆಸ್ತಿಗಳಿಗೆ ಈ ಸ್ವತ್ತು ಮಾಡಲು ಕ್ರಮ ವಹಿಸಲು ಜೊತೆಗೆ ಈ ಸ್ವತ್ತು ಸರ್ವೇ ಕಾರ್ಯ ತ್ವರಿತವಾಗಿ ಪೂರ್ಣಗೊಳಿಸುವಂತೆ ತಿಳಿಸಿದರು. ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಸ್ವಚ್ಚತೆ ಕಾಪಾಡಿಕೊಳ್ಳಲು ಸೂಚನೆ ನೀಡಿದರು.
ಇದೇ ಸಂದರ್ಭದಲ್ಲಿ ಮಂಡ್ಯ ಉಪವಿಭಾಗಾಧಿಕಾರಿ ಶಿವಮೂರ್ತಿ ಸೇರಿದಂತೆ ಅಧಿಕಾರಿಗಳು ಇದ್ದರು.