‘ದಿ ಕಾಶ್ಮೀರ್ ಫೈಲ್ಸ್’ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ದೆಹಲಿ ಹೈಕೋರ್ಟ್ನಲ್ಲಿ ಬೇಷರತ್ ಕ್ಷಮೆ ಯಾಚಿಸಿದ್ದಾರೆ. ಅಲ್ಲದೇ 2023ರ ಮಾರ್ಚ್ 16ರಂದು ನಡೆಯುವ ಮುಂದಿನ ವಿಚಾರಣೆಯಲ್ಲಿ ಖುದ್ದಾಗಿ ವಿವೇಕ್ ಅಗ್ನಿಹೋತ್ರಿ ಹಾಜರಿರಬೇಕು ಎಂದು ದೆಹಲಿ ಹೈಕೋರ್ಟ್ ಆದೇಶಿಸಿದೆ.
ವಿವೇಕ್ ಅಗ್ನಿಹೋತ್ರಿ ಆಗುಹೋಗುಗಳಿಗೆ ಪ್ರತಿಕ್ರಿಯಿಸುವ ಭರದಲ್ಲಿ ವಿವಾದ ಮಾಡಿಕೊಂಡಿದ್ದರು. ಈ ಹಿಂದೆ ಅವರು ಮಾಡಿದ್ದ ಒಂದು ಟ್ವೀಟ್ನಿಂದಾಗಿ ನ್ಯಾಯಾಂಗ ನಿಂದನೆ (Contempt of Court) ಆರೋಪ ಎದುರಾಗಿತ್ತು. ಈ ಪ್ರಕರಣದಲ್ಲಿ ಅವರೀಗ ದೆಹಲಿ ಹೈಕೋರ್ಟ್ನಲ್ಲಿ ಬೇಷರತ್ ಕ್ಷಮೆ ಯಾಚಿಸಿದ್ದಾರೆ. ತಮ್ಮ ವಕೀಲರ ಪರವಾಗಿ ಅವರು ಅಫಿಡವಿಟ್ ಸಲ್ಲಿಸಿದ್ದಾರೆ. ಆದರೆ ಈ ಪ್ರಕರಣದ ಅಂತಿಮ ವಿಚಾರಣೆಯ ಸಮಯದಲ್ಲಿ ವಿವೇಕ್ ಅಗ್ನಿಹೋತ್ರಿ ಅವರು ಖುದ್ದು ಹಾಜರಾಗಬೇಕು ಎಂದು ನ್ಯಾಯಾಲಯ ಸೂಚಿಸಿದೆ.
ಏನಿದು ಪ್ರಕರಣ?
2018ರ ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಸಾಮಾಜಿಕ ಕಾರ್ಯಕರ್ತ ಗೌತಮ್ ನವಲಖ ಅವರಿಗೆ ಈ ಹಿಂದೆ ಜಾಮೀನು ನೀಡಲಾಗಿತ್ತು. ಅಂದಿನ ನ್ಯಾಯಮೂರ್ತಿಗಳಾದ ಎಸ್.ಮುರಳೀಧರ್ ಅವರ ಮೇಲೆ ಪಕ್ಷಪಾತದ ಆರೋಪ ಹೊರಿಸುವ ರೀತಿಯಲ್ಲಿ ವಿವೇಕ್ ಅಗ್ನಿಹೋತ್ರಿ ಟ್ವೀಟ್ ಮಾಡಿದ್ದರು. ಈ ಸಂಬಂಧವಾಗಿ ನ್ಯಾಯಾಲಯವು ನ್ಯಾಯಾಂಗ ನಿಂದನೆ ಕೇಸ್ ದಾಖಲಿಸಿಕೊಂಡಿತ್ತು.
ತಾವು ಮಾಡಿದ್ದ ಟ್ವೀಟ್ ಅನ್ನು ವಿವೇಕ್ ಅಗ್ನಿಹೋತ್ರಿ ಡಿಲೀಟ್ ಮಾಡಿದ್ದಾರೆ ಎಂದು ಅವರ ಪರ ವಕೀಲರು ವಾದಿಸಿದ್ದಾರೆ. ಆದರೆ ಅದನ್ನು ಡಿಲೀಟ್ ಮಾಡಿದ್ದು ವಿವೇಕ್ ಅಗ್ನಿಹೋತ್ರಿ ಅಲ್ಲ, ಬದಲಿಗೆ ಟ್ವಿಟರ್ ಅದನ್ನು ಡಿಲೀಟ್ ಮಾಡಿತ್ತು ಎಂದು ನ್ಯಾಯಾಲಯದ ಪರ ವಕೀಲರು ವಾದಿಸಿದ್ದಾರೆ. ವಿವೇಕ್ ಅಗ್ನಿಹೋತ್ರಿ ಅವರು ಯಾಕೆ ಖುದ್ದಾಗಿ ವಿಚಾರಣೆಗೆ ಹಾಜರಾಗಿಲ್ಲ ಎಂದು ನ್ಯಾಯಾಲಯ ಕಾರಣ ಕೇಳಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ 2023ರ ಮಾರ್ಚ್ 16ರಂದು ಮುಂದಿನ ವಿಚಾರಣೆ ನಡೆಯಲಿದೆ. ಅಂದು ಖುದ್ದಾಗಿ ವಿವೇಕ್ ಅಗ್ನಿಹೋತ್ರಿ ಅವರು ಹಾಜರಿರಬೇಕು ಎಂದು ಕೋರ್ಟ್ ಆದೇಶಿಸಿದೆ. ಅಂದು ತಮ್ಮ ಪರವಾದ ಎಲ್ಲ ಸಾಕ್ಷ್ಯಗಳನ್ನು ಒದಗಿಸಬೇಕು ಎಂದು ಸೂಚಿಸಿದೆ.
‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ನಿರ್ದೇಶನ ಮಾಡಿದ ಬಳಿಕ ವಿವೇಕ್ ಅಗ್ನಿಹೋತ್ರಿ ಅವರ ಖ್ಯಾತಿ ಹೆಚ್ಚಾಗಿದೆ. ಕಡಿಮೆ ಬಜೆಟ್ನಲ್ಲಿ ಸಿದ್ಧಗೊಂಡ ಆ ಚಿತ್ರವು ಗಲ್ಲಾಪೆಟ್ಟಿಗೆಯಲ್ಲಿ ಬರೋಬ್ಬರಿ ₹ 250 ಕೋಟಿ ಗಿಂತಲೂ ಅಧಿಕ ಕಲೆಕ್ಷನ್ ಮಾಡಿತು. ಅಲ್ಲದೇ ದೇಶಾದ್ಯಂತ ಚರ್ಚೆ ಹುಟ್ಟುಹಾಕಿತ್ತು.