ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಎನ್ಡಿಎ ಅಭ್ಯರ್ಥಿಯಾಗಿ ವಿವೇಕಾನಂದ ಕಣಕ್ಕಿಳಿಯಲಿದ್ದು,ಅವರಿಗೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಇಂದು ಬಿ.ಫಾರಂ ವಿತರಿಸಿದರು.
ಈ ಹಿಂದೆ ಬಿಜೆಪಿ ಪಕ್ಷ ದಕ್ಷಿಣ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಈ.ಸಿ. ನಿಂಗರಾಜ್ ಗೌಡ ಅವರನ್ನು ಆಯ್ಕೆ ಮಾಡಿತ್ತು. ಆದರೆ ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ಪ್ರಾಬಲ್ಯವಿದ್ದು, ಈ ಕ್ಷೇತ್ರವನ್ನು ಜೆಡಿಎಸ್ ಅಭ್ಯರ್ಥಿಗೆ ಬಿಟ್ಟುಕೊಡುವಂತೆ ಜೆಡಿಎಸ್ ವರಿಷ್ಠರಾದ ಎಚ್.ಡಿ. ದೇವೇಗೌಡ ಹಾಗೂ ಕುಮಾರಸ್ವಾಮಿ ಬಿಜೆಪಿ ವರಿಷ್ಠರಲ್ಲಿ ಮನವಿ ಮಾಡಿದ್ದರು.
ಈ ಹಿನ್ನಲೆಯಲ್ಲಿ ಬಿಜೆಪಿ ವರಿಷ್ಠರು ಸಹ ದಕ್ಷಿಣ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಈ.ಸಿ. ನಿಂಗರಾಜ ಗೌಡ ಅವರಿಗೆ ಬಿ.ಫಾರಂ ವಿತರಿಸಿರಲಿಲ್ಲ. ಹಾಗಾಗಿ ನಿಂಗರಾಜ್ ಗೌಡ ಇಂದು ತಮ್ಮ ಅಪಾರ ಬೆಂಬಲಿಗರೊಂದಿಗೆ ಮೈಸೂರಿನ ಪ್ರಾದೇಶಿಕ ಕಚೇರಿಯಲ್ಲಿ ಬಿ.ಫಾರಂ ಇಲ್ಲದೆ ನಾಮಪತ್ರ ಸಲ್ಲಿಸಿದ್ದಾರೆ.
ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಈಗಾಗಲೇ ಮರಿತಿಬ್ಬೇಗೌಡ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಬಿ.ಫಾರಂ ಸಲ್ಲಿಸಿದ್ದು,ಈಗ ಎನ್ಡಿಎ ಅಭ್ಯರ್ಥಿಯಾಗಿ ವಿವೇಕಾನಂದ ಕಣಕ್ಕಿಳಿಯಲಿದ್ದಾರೆ.ಈ ಮಧ್ಯೆ ಬಿಜೆಪಿಯ ಈ.ಸಿ.ನಿಂಗರಾಜ್ ಗೌಡ ಕೂಡ ನಾಮಪತ್ರ ಸಲ್ಲಿಸಿದ್ದು,ನಾಮಪತ್ರ ವಾಪಸ್ ಪಡೆಯುತ್ತಾರೋ, ಇಲ್ಲಾ ಬಂಡಾಯ ಅಭ್ಯರ್ಥಿಯಾಗಿ ಕಣದಲ್ಲಿ ಉಳಿಯುತ್ತಾರೋ ಎಂಬುದು ಕುತೂಹಲ ಮೂಡಿಸಿದೆ.