ಕೃಷ್ಣರಾಜಸಾಗರ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸಲಾಗಿದ್ದು,ಮಳೆಯಿಲ್ಲದ ಕಾರಣದಿಂದ ಬೆಳೆ ಬೆಳೆಯದೆ ಬಸವಳಿದಿದ್ದ ರೈತರ ಮೊಗದಲ್ಲಿ ಸಂತಸ ತಂದಿದೆ.
ಕಳೆದ ವರ್ಷ ಮುಂಗಾರು ಮಳೆ ಕೈ ಕೊಟ್ಟಿದ್ದರಿಂದ ಸರ್ಕಾರ ನಾಲೆಗಳಿಗೆ ನೀರು ಹರಿಸಲು ಸಾಧ್ಯವಾಗಲಿಲ್ಲ.ಈ ಕಾರಣದಿಂದ ರೈತರು ಕೃಷಿ ಚಟುವಟಿಕೆಗಳಲ್ಲಿ ತೊಡಗದ ಪರಿಣಾಮ ಸಾಕಷ್ಟು ಸಂಕಷ್ಟ ಅನುಭವಿಸಿದ್ದರು. ತೆಂಗು, ಅಡಿಕೆ, ಕಬ್ಬು, ಬಾಳೆ ಸೇರಿದಂತೆ ತೋಟಗಾರಿಕೆ ಬೆಳೆಗಳು ನೀರಿಲ್ಲದ ಕಾರಣ ರೈತರು ನಷ್ಟ ಅನುಭವಿಸಿದ್ದರು. ತೆಂಗುಗೆ ನೀರಿಲ್ಲದೆ ಸುಳಿಗಳು ಒಣಗಿ ಹೋಗಿದ್ದವು.ಕೆರೆ-ಕಟ್ಟೆಗಳಲ್ಲಿ ನೀರು ಬತ್ತಿ ಹೋಗಿ ಕುಡಿಯುವ ನೀರಿಗೂ ತತ್ವಾರವಾಗಿತ್ತು.
ಆದರೆ ಈ ಬಾರಿ ಮುಂಗಾರು ಮಳೆ ಸಮಾಧಾನ ತಂದಿದ್ದು ಕೊಡಗಿನಲ್ಲಿ ಸಾಕಷ್ಟು ಮಳೆ ಆಗುತ್ತಿರುವ ಕಾರಣ ಕೃಷ್ಣರಾಜ ಸಾಗರ ಜಲಾಶಯಕ್ಕೆ ನೀರು ಹರಿದು ಬರುತ್ತಿದ್ದು 104 ಅಡಿಗೆ ಮುಟ್ಟಿದೆ. ಕಳೆದ ವಾರ ಬೆಂಗಳೂರಿನಲ್ಲಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿಯವರು ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಜುಲೈ 8ರಿಂದ ನಾಲೆಗಳಿಗೆ ನೀರು ಹರಿಸುವುದಾಗಿ ತಿಳಿಸಿದ್ದರು.
ಅದರಂತೆ ನಾಲೆಗಳಲ್ಲಿ ನೀರು ಹರಿಸಲಾಗುತ್ತಿದ್ದು, ರೈತರ ಮೊಗದಲ್ಲಿ ಸಂತೋಷ ತಂದಿದೆ. ನಾಲೆಗಳಿಗೆ 15 ದಿನ ನಿರಂತರವಾಗಿ ನೀರು ಹರಿಸುವುದಾಗಿ ಸಚಿವರು ತಿಳಿಸಿರುವುದರಿಂದ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳು ಗರಿಗೆದರಿದೆ.