ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಸೂಚನೆಯಂತೆ ತಮಿಳುನಾಡಿಗೆ ನೀರು ಬಿಟ್ಟ ರಾಜ್ಯ ಸರ್ಕಾರದ ಕ್ರಮಕ್ಕೆ ಜಿಲ್ಲೆಯಾದ್ಯಂತ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸೋಮವಾರ ನಡೆದ ಕಾವೇರಿ ನದಿ ನೀರು ಪ್ರಾಧಿಕಾರದ ಸಭೆಯಲ್ಲಿ ಪ್ರತಿದಿನ ಐದು ಸಾವಿರ ಕ್ಯೂಸೆಕ್ನಂತೆ ಹದಿನೈದು ದಿನ ನೀರು ಹರಿಸಬೇಕೆಂದು ಆದೇಶ ನೀಡಲಾಗಿದೆ.ಅದರಂತೆ ಸೋಮವಾರ ತಡರಾತ್ರಿಯಿಂದಲೇ ತಮಿಳುನಾಡಿಗೆ ಹರಿಯುತ್ತಿರುವ ಕಾವೇರಿ ನೀರು ಹರಿಸಲಾಗುತ್ತಿದೆ.
ರಾಜ್ಯ ಸರ್ಕಾರದ ಆದೇಶದ ವಿರುದ್ಧ ನಿನ್ನೆಯಿಂದಲೇ ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ಇಂದು ಕೂಡ ವಿವಿಧ ಸಂಘಟನೆಗಳಿಂದ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಪ್ರತಿಭಟನೆ ನಡೆಯುತ್ತಿದೆ.
ಕಾವೇರಿ ನದಿ ನೀರು ವಿಚಾರದಲ್ಲಿ ಪದೆ ಪದೇ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ.ಮಳೆ ಇಲ್ಲದೇ ಬರಗಾಲ ಪೀಡಿತ ಪ್ರದೇಶವಾದರೂ ಪರಿಸ್ಥಿತಿ ಪರಿಗಣಿಸದ ಪ್ರಾಧಿಕಾರದ ಆದೇಶದ ಬಗ್ಗೆ ಕಾವೇರಿ ಹಿತರಕ್ಷಣಾ ಸಮಿತಿ ಪದಾಧಿಕಾರಿಗಳು, ಪ್ರಗತಿಪರ ಸಂಘಟನೆಗಳ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಡಿಕೆಶಿ ಸಮರ್ಥನೆ
ತಮಿಳುನಾಡಿಗೆ ನೀರು ಹರಿಸಿರುವ ರಾಜ್ಯ ಸರ್ಕಾರದ ನಿಲುವನ್ನು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಮರ್ಥಿಸಿ ಕೊಂಡಿದ್ದಾರೆ.ಬೆಂಗಳೂರಿನಲ್ಲಿ ಮಾತನಾಡಿದ ಅವರು,ಈ ವಿಚಾರವಾಗಿ ಇಂದು ದೆಹಲಿಗೆ ಹೋಗುತ್ತಿದ್ದೇನೆ.ನಾಳಿದ್ದು ಸುಪ್ರೀಂ ಕೋರ್ಟ್ ನಲ್ಲಿ ಕಾವೇರಿ ಬಗ್ಗೆ ವಿಚಾರಣೆ ನಡೆಯಲಿದ್ದು ಹಾಗಾಗಿ ಕಾವೇರಿ ನದಿ ನೀರು ಪ್ರಾಧಿಕಾರದ ಆದೇಶದಂತೆ ನೀರು ಹರಿಸಲಾಗುತ್ತಿದೆ.ನ್ಯಾಯಾಲಯದ ಮುಂದೆ ಕಾವೇರಿ ಜಲಾಶಯಗಳಲ್ಲಿ ನೀರಿಲ್ಲದ ಪರಿಸ್ಥಿತಿಯನ್ನು ವಿವರಿಸುವುದಾಗಿ ತಿಳಿಸಿದರು.
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಯಾವುದೇ ಕಾರಣಕ್ಕೂ ನೀರು ಹರಿಸಬಾರದೆಂದು ಹೇಳಿದ್ದಾರೆ.ಅವರ ಸರ್ಕಾರ ಇದ್ದಾಗಲೂ ನೀರು ಹರಿಸಿಲ್ವಾ.ನಾವು ಸುಪ್ರೀಂ ಕೋರ್ಟ್ಗೆ ಗೌರವ ಕೊಡಬೇಕು. ಹಾಗಾಗಿ ನೀರು ಹರಿಸುತ್ತಿದ್ದೇವೆ ಎಂದು ರಾಜ್ಯ ಸರ್ಕಾರದ ನಿಲುವನ್ನು ಸಮರ್ಥಿಸಿಕೊಂಡಿದ್ದಾರೆ.