ವಾರಣಾಸಿಯಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯ ಪ್ರಯಾಣಿಕರು ಸುರಕ್ಷಿತವಾಗಿ ಆಗಮಿಸುತ್ತಿದ್ದಾರೆ ಎಂದು ರೇಷ್ಮೆ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದ್ದಾರೆ.
ಅಗ್ನಿಪಥ್ ಯೋಜನೆ ವಿರೋಧಿಸಿ ಉತ್ತರಪ್ರದೇಶದಲ್ಲಿ ಉಂಟಾದ ಹಿಂಸಾಚಾರದಿಂದಾಗಿ ರೈಲು ಸಂಚಾರ ರದ್ದಾದ ಪರಿಣಾಮ ವಾರಾಣಸಿಗೆ ತೆರಳಿದ್ದ ಮಂಡ್ಯ ಹಾಗೂ ರಾಮನಗರದ ಪ್ರಯಾಣಿಕರು ಹಿಂದಿರುಗಲು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿತ್ತು.
ಈ ಹಿನ್ನೆಲೆಯಲ್ಲಿ ಸಚಿವ ಡಾ.ನಾರಾಯಣಗೌಡ ಅವರು, ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಹಾಗೂ ಜಿಲ್ಲಾಡಳಿತದ ಮೂಲಕ ಉತ್ತರ ಪ್ರದೇಶ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್ ಆಗಲು ಬಸ್ ವ್ಯವಸ್ಥೆ ಕಲ್ಪಿಸಲಾಯಿತು.
ನಿನ್ನೆ ಸಂಜೆ ಎರಡು ಬಸ್ ಹೊರಟಿದ್ದು, ಇಂದು ಬೆಳಗ್ಗೆ ಮತ್ತೊಂದು ಬಸ್ ಹೊರಟಿದೆ. ಪ್ರತಿಯೊಬ್ಬರನ್ನೂ ಸುರಕ್ಷಿತವಾಗಿ ಮನೆಗಳಿಗೆ ತಲುಪಿಸಲು ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದ್ದಾರೆ.