Saturday, September 28, 2024

ಪ್ರಾಯೋಗಿಕ ಆವೃತ್ತಿ

ನಿರ್ಮಲಾ ಸೀತಾರಾಮನ್ ವಿರುದ್ದ ಎಫ್‌ಐಆರ್ ದಾಖಲಿಸಲು ಆದೇಶ : ವಿತ್ತ ಸಚಿವರು ರಾಜೀನಾಮೆ ಕೊಡ್ತಾರಾ? ಎಂದ ಸಿಎಂ ಸಿದ್ದರಾಮಯ್ಯ

ಚುನಾವಣಾ ಬಾಂಡ್ ಮೂಲಕ ಸುಲಿಗೆ ಮಾಡಿರುವ ಆರೋಪದ ಮೇಲೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಇತರರ ವಿರುದ್ದ ಎಫ್‌ಐಆರ್ ದಾಖಲಿಸಲು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶುಕ್ರವಾರ (ಸೆ.28) ಆದೇಶಿಸಿದೆ.

ಚುನಾವಣಾ ಬಾಂಡ್ ಮೂಲಕ ಹೆದರಿಸಿ ಸುಲಿಗೆ ಮಾಡಲಾಗಿದೆ. ಹಾಗಾಗಿ, ನಿರ್ಮಲಾ ಸೀತಾರಾಮನ್ ಹಾಗೂ ಮತ್ತಿತರರ ವಿರುದ್ದ ಕ್ರಮ ಕೈಗೊಳ್ಳಲು ನಿರ್ದೇಶನ ನೀಡುವಂತೆ ಜನಾಧಿಕಾರ ಸಂಘರ್ಷ ಪರಿಷತ್ (ಜೆಎಸ್‌ಪಿ)ಯ ಸಹ ಅಧ್ಯಕ್ಷ ಆದರ್ಶ್ ಅಯ್ಯರ್ ಅವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದರು.

ದೂರು ಪರಿಗಣಿಸಿದ ನ್ಯಾಯಾಲಯ, ನಿರ್ಮಲಾ ಸೀತಾರಾಮನ್, ಜಾರಿ ನಿರ್ದೇಶನಾಲಯ(ಇಡಿ) ದ ಅಧಿಕಾರಿಗಳು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಬಿಜೆಪಿ ರಾಷ್ಟ್ರೀಯ ಸಮಿತಿಯ ಪದಾಧಿಕಾರಿಗಳು, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಬಿಜೆಪಿ ರಾಜ್ಯಾಧ್ಯಕ್ಷ ಬಿ,ವೈ ವಿಜಯೇಂದ್ರ ಮತ್ತು ಬಿಜೆಪಿ ರಾಜ್ಯ ಸಮಿತಿಯ ಪದಾಧಿಕಾರಿಗಳ ವಿರುದ್ದ ಎಫ್‌ಐಆರ್‌ ದಾಖಲಿಸಲು ತಿಲಕ್ ನಗರ ಪೊಲೀಸರಿಗೆ ನಿರ್ದೇಶನ ನೀಡಿದೆ.

ಮುಂದಿನ ವಿಚಾರಣೆಯನ್ನು ಅಕ್ಟೋಬರ್ 10ಕ್ಕೆ ನಿಗದಿ ಮಾಡಿದೆ.

ರಾಜೀನಾಮೆ ಕೊಡ್ತಾರಾ? ಸಿಎಂ ಸಿದ್ದರಾಮಯ್ಯ

ನಿರ್ಮಲಾ ಸೀತಾರಾಮನ್ ಮೇಲೆ ಎಫ್‌ಐಆರ್ ದಾಖಲಿಸಲು ನ್ಯಾಯಾಲಯ ಆದೇಶಿಸಿರುವುದರಿಂದ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡ್ತಾರಾ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಮೈಸೂರಿನ ಕೆಡಿಪಿ ಸಭೆ ಬಳಿಕ ಮಾತನಾಡಿದ ಅವರು, “ಹೆಚ್‌.ಡಿ ಕುಮಾರಸ್ವಾಮಿ ಮೊದಲು ನಿರ್ಮಲಾ ಸೀತಾರಾಮನ್ ಅವರನ್ನು ಕೆಳಗಿಳಿಸಲಿ, ಬಳಿಕ ನನ್ನ ರಾಜೀನಾಮೆ ಕೇಳಲಿ. ಚುನಾವಣಾ ಬಾಂಡ್ ದುರುಪಯೋಗ ಮಾಡಿರುವುದರಿಂದ ಪ್ರಧಾನಿ ಮೋದಿ ಕೂಡ ರಾಜೀನಾಮೆ ಕೊಡಬೇಕು” ಎಂದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!