ವರದಕ್ಷಿಣೆ ಕಿರುಕುಳ, ಕೌಟುಂಬಿಕ ದೌರ್ಜನ್ಯ, ಅತ್ಯಾಚಾರ ಹಾಗೂ ಲೈಂಗಿಕ ಕಿರುಕುಳಕ್ಕೊಳಗಾದ ಮಹಿಳೆಯರಿಗೆ ಆತ್ಮಸ್ಥೈರ್ಯ ತುಂಬಲು ಮಹಿಳಾ ಕಾನೂನು ಹಾಗೂ ಕಾಯ್ದೆಗಳ ಕುರಿತು ಕಾರ್ಯಾಗಾರ ಆಯೋಜಿಸುವುದು ಮುಖ್ಯ ಎಂದು ಶಾಸಕ ಎ.ಬಿ. ರಮೇಶ್ ಬಂಡಿಸಿದ್ದೇಗೌಡ ತಿಳಿಸಿದರು.
ನಾಡ ಹಬ್ಬ ಶ್ರೀರಂಗಪಟ್ಟಣ ದಸರಾ ಅಂಗವಾಗಿ ಶ್ರೀರಂಗಪಟ್ಟಣ ಶ್ರೀರಂಗನಾಥಸ್ವಾಮಿ ದೇವಸ್ಥಾನದ ಆವರಣದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಹಯೋಗದೊಂದಿಗೆ ಮಹಿಳೆಯರಿಗೋಸ್ಕರ ಹಮ್ಮಿಕೊಂಡಿದ್ದ ಮಹಿಳಾ ದಸರಾದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಹೆಣ್ಣುಮಕ್ಕಳು ಪ್ರಸ್ತುತದಲ್ಲಿ ಎಲ್ಲಾ ಕ್ಷೇತ್ರದಲ್ಲಿ ಸಬಲರು ಮಹಿಳೆಯರು ಒಟ್ಟಾರೆ ಸಾಮಾಜಿಕ ಹಾಗೂ ಆರ್ಥಿಕ ಸ್ಥಿತಿಗತಿಗಳನ್ನು ಉತ್ತಮ ಪಡಿಸಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಸಿಗುವ ಎಲ್ಲಾ ಸೌಲಭ್ಯಗಳು ಪಡೆಯವ ಮೂಲಕ ಉತ್ತಮ ಜೀವನ ಮಟ್ಟ ಸುಧಾರಿಸಿ ಕೊಳ್ಳಬೇಕು ಎಂದರು.
ಇದೇ ವೇಳೆ ಮಹಿಳಾ ಮತ್ತು ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ರಾಜಮೂರ್ತಿ ರವರು ಮಾತನಾಡಿ ಮಹಿಳೆಯರ ಮೇಲೆ ಇಂದಿನ ಆಧುನಿಕ ಜಗತ್ತಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಗಟ್ಟಲು ಎಲ್ಲರ ಸಹಕಾರ ಮುಖ್ಯ ಎಂದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಸಿದ್ದಲಿಂಗೇಶ್, ಪುರಸಭೆಯ ಮುಖ್ಯಾಧಿಕಾರಿ ರಾಣಿ,
ಸಿ.ಡಿ.ಪಿ.ಒಗಳು, ಸ್ವಸಹಾಯ ಸಂಘದ ಸದಸ್ಯರು, ಮೇಲ್ವಿಚಾರಕರು ಮತ್ತು ಅಂಗನವಾಡಿ ಕಾರ್ಯಕರ್ತರು ಹಾಜರಿದ್ದರು.