ರಾಜ್ಯ ಸರ್ಕಾರವು ರೂಪಿಸಲು ಉದ್ದೇಶಿಸಿರುವ ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರವನ್ನು ಭಾರತ ಆಹಾರದ ನಿಗಮದ ಮೂಲಕ ಅಕ್ಕಿ ನೀಡಲು ಹಿಂದೇಟು ಹಾಕುತ್ತಿರುವುದು ಅರ್ಹ ಕೂಲಿ ಕಾರ್ಮಿಕರಿಗೆ ಒಂದೊತ್ತಿನ ಊಟಕ್ಕೂ ತೊಂದರೆಯಾಗಿದೆ. ಕೂಡಲೇ ರಾಜ್ಯ ಸರ್ಕಾರವು ಪರ್ಯಾಯ ವ್ಯವಸ್ಥೆ ಅಡಿಯಲ್ಲಿ ಅನ್ನಭಾಗ್ಯ ಯೋಜನೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಕಾರ್ಯಕರ್ತರು ಕೆ.ಆರ್.ಪೇಟೆ ಪಟ್ಟಣದ ತಾಲ್ಲೂಕು ಕಚೇರಿಯ ಎದುರು ಪ್ರತಿಭಟನೆ ನಡೆಸಿದರು.
ಕರ್ನಾಟಕ ಪ್ರಾಂತ ಕೂಲಿಕಾರರ ಸಂಘದ ಕೆ. ಆರ್. ಪೇಟೆ ತಾಲ್ಲೂಕು ಸಮಿತಿಯ ಅಧ್ಯಕ್ಷ ಜಿಎಚ್ ಗಿರೀಶ್ ನೇತೃತ್ವದಲ್ಲಿ ಕೂಲಿ ಕಾರ್ಮಿಕ ಮಹಿಳೆಯರು ಗಂಜಿ ಕುಡಿಯುವ ಮೂಲಕ ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ಬರಬೇಕಾಗಿರುವ ಅಕ್ಕಿಯನ್ನು ತಡೆದಿರುವುದರಿಂದ ನಾವು ಗಂಜಿ ಕುಡಿಯಬೇಕಾಗುತ್ತದೆ ಎಂದು ಗಂಜಿ ಕುಡಿಯುವ ಮೂಲಕ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ತಾಲ್ಲೂಕು ಸಮಿತಿ ಅಧ್ಯಕ್ಷ ಗಂಗೇನಹಳ್ಳಿ ಗಿರೀಶ್ ಮಾತನಾಡಿ, ಒಕ್ಕೂಟ ವ್ಯವಸ್ಥೆಯಲ್ಲಿರುವ ಕರ್ನಾಟಕ ರಾಜ್ಯಕ್ಕೆ ಕೇಂದ್ರ ಸರಕಾರವು ರಾಜ್ಯ ಸರ್ಕಾರಕ್ಕೆ ಅನ್ನಭಾಗ್ಯ ಯೋಜನೆಗೆ ಬಡವರ, ಕೂಲಿಕಾರರ ಹಿತದೃಷ್ಟಿಯಿಂದ ಸ್ಪಂದಿಸಿ ತಲಾ 10 ಕೆ.ಜಿ. ಅಕ್ಕಿ ನೀಡಲು ತೀರ್ಮಾನಿಸಿರುವ ಹಿನ್ನೆಲೆಯಲ್ಲಿ ತನ್ನ ಅಧೀನದಲ್ಲಿರುವ ಕೇಂದ್ರ ಸರ್ಕಾರ ಅಕ್ಕಿ ನೀಡಬೇಕಾದುದು ಒಕ್ಕೂಟ ನೀತಿ ಅನ್ವಯ ಕೇಂದ್ರದ ಕರ್ತವ್ಯವಾಗಿತ್ತು. ಆದರೆ ಕೇಂದ್ರ ಸರ್ಕಾರ ಹಸಿದ ಹೊಟ್ಟೆಗೆ ನಾನು ಅಕ್ಕಿ ಕೊಡುವುದಿಲ್ಲ ಎಂಬ ಹಠಮಾರಿ ಧೋರಣೆ ಅನುಸರಿಸುತ್ತಿರುವುದು ಅತ್ಯಂತ
ಖಂಡನೀಯ ಎಂದರು.
ಹೋರಾಟ ನಡೆಯುತ್ತಿದ್ದ ಸ್ಥಳಕ್ಕೆ ಶಾಸಕ ಎಚ್.ಟಿ.ಮಂಜು ಬೇಟಿ ನೀಡಿ ಪ್ರತಿಭಟನಾಕಾರರ ಬೇಡಿಕೆಯನ್ನು ಆಲಿಸಿದರು. ಈ ಸಂದರ್ಭದಲ್ಲಿ ತಾಲೂಕು ಕೂಲಿ ಕಾರ್ಮಿಕರ ಸಂಘದ ಉಪಾಧ್ಯಕ್ಷ ಸುರೇಶ್, ಕಾರ್ಯದರ್ಶಿ ಗೋಪಾಲ್, ಸಹ ಕಾರ್ಯದರ್ಶಿ ಗೋವಿಂದ ಹಾಗೂ ಕೂಲಿಕಾರರು ಕೂಲಿ ಕಾರ್ಮಿಕ ಮಹಿಳೆಯರು ಈ ಹೋರಾಟದಲ್ಲಿ ಉಪಸ್ಥಿತರಿದ್ದರು.
ಪ್ರತಿಭಟನೆಯ ನಂತರ ತಹಸೀಲ್ದಾರ್ ವಿಖಾರ್ ಅಹಮದ್ ಹಾಗೂ ಶಾಸಕ ಮಂಜು ಅವರಿಗೆ ಮನವಿ ಪತ್ರವನ್ನು ಸಲ್ಲಿಸಿದರು.