ಮದ್ದೂರು ಪಟ್ಟಣದ ತಮಿಳು ಕಾಲೋನಿ ಜಾಗವನ್ನು ಕಬಳಿಸಲು ವಕ್ಫ್ ಮಂಡಳಿ ಹುನ್ನಾರ ನಡೆಸಿದ್ದು, ಇವರ ವಿರುದ್ದ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಭೂಮಿ ಮತ್ತು ವಸತಿ ಹಕ್ಕು ಹೋರಾಟ ಸಮಿತಿ ವತಿಯಿಂದ ಸೋಮವಾರ ಮಂಡ್ಯದಲ್ಲಿ ಪ್ರತಿಭಟನೆ ನಡೆಯಿತು.
ಮಂಡ್ಯ ನಗರದ ಸಿಲ್ವರ್ ಜ್ಯೂಬಿಲಿ ಪಾರ್ಕಿನಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿ ಸಮೀಪದ ಎಸ್.ಎಂ.ವಿ ಪ್ರತಿಮೆ ಮುಂಭಾಗ ಧರಣಿ ನಡೆಸಿ, ಜಿಲ್ಲಾಡಳಿತ ಹಾಗೂ ಅಧಿಕಾರಿಗಳ ವಿರುದ್ದ ಘೋಷಣೆ ಕೂಗಿದರು. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಮದ್ದೂರು ಶಾಸಕರು ಕೂಡಲೇ ಸ್ಥಳಕ್ಕೆ ಆಗಮಿಸಿ ಸಮಸ್ಯೆ ಬಗೆಹರಿಸಬೇಕೆಂದು ಒತ್ತಾಯಿಸಿದರು.
ಮದ್ದೂರಿನ ತಮಿಳ್ ಕಾಲೋನಿ ಜನರ ಭೂಮಿ ಸಮಸ್ಯೆಯನ್ನೂ ಉಸ್ತುವಾರಿ ಸಚಿವರು ಮತ್ತು ಮದ್ದೂರು ಪರಿಗಣಿಸಬೇಕು ಗಂಭೀರವಾಗಿ ಪರಿಗಣಿಸಬೇಕು. ಜಿಲ್ಲಾಡಾಳಿತ ಮತ್ತು ಜನರನ್ನು ದಿಕ್ಕು ತಪ್ಪಿಸಿ ಅಕ್ರಮವಾಗಿ ಜನರ ಜಾಗವನ್ನು ಕಬಳಿಸಿಸಲು ಯತ್ನಿಸುತ್ತಿರುವ ವಕ್ಟ್ ಮಂಡಳಿಯ ವಿರುದ್ಧ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದರು.
ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಬಳಿ ಹಲವು ದಿನಗಳಿಂದ ಅನಿರ್ದಿಷ್ಟಾವಧಿ ಧರಣಿ ನಡೆಸಿದ್ದರೂ ಸಹ ಚುನಾಯಿತ ಜನಪ್ರತಿನಿಧಿಗಳು, ಜಿಲ್ಲಾಡಳಿತ ಮತ್ತು ಸರ್ಕಾರ ಸ್ಪಂದಿಸದೆ ಮೌನ ವಹಿಸಿದ್ದಾರೆ, ಸ್ವಚ್ಛತೆ ಕೆಲಸ ನಿರ್ವಹಿಸಿ ದುಡಿದು ಬದುಕುವ ಜನತೆಗೆ ವಾಸಕ್ಕೊಂದು ಸೂರಿಲ್ಲದಂತಾಗಿದೆ. ಎಲ್ಲರಂತೆ ನಮಗೆ ಬದುಕುವ ಹಕ್ಕು ಇಲ್ಲವೇ ಎಂದು ಪ್ರತಿಭಟನಾಕಾರರು ಪ್ರಶ್ನಿಸಿದರು.
ಮದ್ದೂರಿನ ಕೆಇಬಿ ಮುಂಭಾಗದ ತಮಿಳು ಕಾಲೋನಿ ಪ್ರದೇಶ ಕಳೆದ 57 ವರ್ಷಗಳ ಹಿಂದೆ ಸ್ಲಂ ಎಂದು ಘೋಷಿತವಾಗಿದೆ. ಆದರೆ ಇಲ್ಲಿನ ನಿವಾಸಿಗಳಿಗೆ ಇದುವರೆಗೂ ಹಕ್ಕು ಪತ್ರ ನೀಡಿಲ್ಲ, ಬಡ ಜನರ ಸಮಸ್ಯೆ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಾರೆ, ಶ್ರಮಿಕ ನಿವಾಸಿಗಳು ವಾಸಿಸುತ್ತಿರುವ ಪ್ರದೇಶವನ್ನು ಪ್ರದೇಶವನ್ನು ಕೊಳಚೆ ಅಭಿವೃದ್ಧಿ ಮಂಡಳಿಗೆ ಹಸ್ತಾಂತರ ಮಾಡಬೇಕು,ಕಾಲೋನಿಯ 114 ಕುಟುಂಬಗಳನ್ನು ಸಮೀಕ್ಷೆ ಮಾಡಿ ಕೂಡಲೇ ಹಕ್ಕುಪತ್ರಗಳನ್ನು ನೀಡಬೇಕು ಎಂದು ಒತ್ತಾಯಿಸಿದರು.
ಹೋರಾಟ ಸಮಿತಿಯ ರಾಜ್ಯ ಕಾರ್ಯದರ್ಶಿ ಎಂ. ಸಿದ್ದರಾಜು, ಕರ್ನಾಟಕ ಜನಶಕ್ತಿಯ ಪೂರ್ಣಿಮ ಮತ್ತು ಮದ್ದೂರು ತಮಿಳು ಕಾಲೋನಿಯ ಎಲ್ಲಾ ಮುಖಂಡರು ಭಾಗವಹಿಸಿದ್ದರು.