ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಛೇರಿ, ಜಿಲ್ಲಾ ಆಸಾಂಕ್ರಾಮಿಕ ರೋಗಗಳ ಘಟಕ (ಎನ್.ಸಿ.ಡಿ) ಇವರ ಸಹಯೋಗದಲ್ಲಿ ವಿಶ್ವ ಕ್ಯಾನ್ಸರ್ ಜಾಗೃತಿ ದಿನಾಚರಣೆ ಹಾಗೂ ಜಾಗೃತಿ ಜಾಥಗೆ ಮಂಡ್ಯ ನಗರದ ಸಂಜಯ ವೃತ್ತದ ಬಳಿ ಜಿಲ್ಲಾ ಕಾರಾಗೃಹ ಅಧೀಕ್ಷಕ ಟಿ.ಕೆ. ಲೋಕೇಶ್ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಜಾಗೃತಿ ಅಭಿಯಾನದಲ್ಲಿ ಕ್ಯಾನ್ಸರ್ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಹಾಗೂ ಕ್ಯಾನ್ಸರ್ ರೋಗಿಗಳಿಗೆ ಸೂಕ್ತ ಸಮಯದಲ್ಲಿ ವೈದ್ಯಕೀಯ ಸೌಲಭ್ಯಗಳನ್ನು ನೀಡಬೇಕಿದೆ ಎಂದರು.
ಕ್ಯಾನ್ಸರ್ ಕಾಯಿಲೆಯು ಮಾರಣಾಂತಿಕ ಕಾಯಿಲೆಯಾಗಿದ್ದು, ಇತ್ತೀಚಿನ ದಿನಗಳಲ್ಲಿ ತುಂಬ ಮಂದಿ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದಾರೆ. ಪ್ರತಿ ವರ್ಷ ಹತ್ತು ಲಕ್ಷಕ್ಕೂ ಹೆಚ್ಚು ಮಂದಿ ಕ್ಯಾನ್ಸರ್ ಕಾಯಿಲೆಗೆ ತುತ್ತಾಗುತ್ತಿದ್ದು, ಇದರಲ್ಲಿ ಐದು ಲಕ್ಷಕ್ಕೂ ಹೆಚ್ಚಿನ ಮಂದಿ ಸಾವಿಗೀಡಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ 1933 ರಿಂದ ಫೆಬ್ರವರಿ 4 ರಂದು ಕ್ಯಾನ್ಸರ್ ಕುರಿತು ಜಾಗೃತಿ ದಿನಾಚರಣೆ ಆಚರಿಸಲಾಗುತ್ತಿದೆ ಎಂದರು.
ಜಾಥದಲ್ಲಿ ಸರ್ವೇಕ್ಷಣಾಧಿಕಾರಿ ಡಾ.ಸಂಜಯ್ ಎಂ.ಡಿ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಅಶ್ವಥ್ ಕೆ.ಪಿ.ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಭವಾನಿ ಶಂಕರ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಶಶಿಧರ್ ಕೆ.ಆರ್, ಡಾ. ಆಶಾಲತಾ, ಡಾ.ಅನಿಲ್ ಕುಮಾರ್, ಡಾ.ವೇಣುಗೋಪಾಲ್, ಡಾ. ಜವರೇಗೌಡ, ಶಿವಾನಂದ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು, ಆರೋಗ್ಯ ನಿರೀಕ್ಷಾಧಿಕಾರಿಗಳು, ಆಶಾ ಕಾರ್ಯಕರ್ತರು ಹಾಜರಿದ್ದರು.